ಬೀದರ್

ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತುನಿಡುತ್ತಿದೆ:ಸಚಿವ ಈಶ್ವರ ಬಿ.ಖಂಡ್ರೆ

ಬೀದರ, ಅಗಸ್ಟ್ 30 – ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಈ ಹಿನ್ನೆಲೆಯಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ, ಹಾಗೂ ಆರ್ಥಿಕ ಸಹಕಾರಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ ಎಂದು ಅರಣ್ಯ, ಜೈವಿಕ ಹಾಗೂ ಪರಿಸರ ಮತ್ತು ಬೀದರ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಬುಧವಾರ ಬೀದರನ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಇವರ ಸಂಯುಕ್ತಾಶ್ರದಲ್ಲಿ ಆಯೋಜಿಸಿದ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಮಹಿಳಾ ಸಬಲೀಕರಣದಿಂದಲೇ ದೇಶದ ಪ್ರಗತಿ ಸಾಧ್ಯ ಎಂಬುವುದನ್ನು ಎಲ್ಲರೂ ಅರಿಯಬೇಕು. ದೇಶದಲ್ಲಿ ಮಹಿಳೆಯ ರಕ್ಷಣೆಗೆ ಅನೇಕ ಕಾಯ್ದೆ ಕಾನೂನುಗಳು ಇದ್ದರೂ ಸಹ ಅವರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ರಕ್ಷಣೆ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಈಗಾಗಲೇ ಹಿಂದೆ ನಮ್ಮ ಸರ್ಕಾರ ಇದ್ದಾಗ ಮಹಿಳೆಯ ಪ್ರಗತಿಗಾಗಿ ಅನೇಕ ಕಾರ್ಯಕ್ರಮ ರೂಪಿಸುವದರ ಜೊತೆಗೆ ಅವರ ರಕ್ಷಣೆಗೆ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದೆ ಮುಂದೆಯೂ ನಮ್ಮ ಸರ್ಕಾರ ಮಹಿಳೆಯರ ಪ್ರಗತಿಗೆ ದುಡಿಯಲಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗಿದ್ದು, ಅದರ ಸದುಪಯೋಗವನ್ನು ಈಗಾಗಲೇ ರಾಜ್ಯದ ಜನರು ಪಡೆಯುತ್ತಿದ್ದಾರೆ. ಅದೇ ರೀತಿ ಇಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಗೃಹಲಕ್ಷೀ ಯೋಜನೆಯಡಿ ರಾಜ್ಯದ 1 ಕೋಟಿ 11 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ಬೀದರ ಜಿಲ್ಲೆಯಲ್ಲಿ 2,90,077 ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡಿರುವ ಇವರ ಬ್ಯಾಂಕ್ ಖಾತೆಗೆ 2000 ರೂ. ಹಣ ಜಮೆ ಮಾಡಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಇದ್ದು ಬೀದರ ಜಿಲ್ಲೆಯ ಜನರು ಇದರ ಲಾಭ ಪಡೆಯುವಂತೆ ಹೇಳಿದರು.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಮಾತನಾಡಿ, ಬೀದರ ಜಿಲ್ಲೆಯಲ್ಲಿ 17 ರಿಂದ 18 ಲಕ್ಷ ಜನ ಈ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆ ಇದೆ. ಇಂದಿನ ಈ ಕಾರ್ಯಕ್ರಮ ಏಕಕಾಲಕ್ಕೆ 6 ಸಾವಿರ ಗ್ರಾಮ ಪಂಚಾಯತಗಳಲ್ಲಿ ನಡೆಯುತ್ತಿದೆ. ಈ ಯೋಜನೆಯಿಂದ ಎಲ್ಲಾ ಮಹಿಳೆಯರು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಆದ್ದರಿಂದ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಎಲ್ಲಾ ಮಹಿಳೆಯರು ಪಡೆಯಬೇಕೆಂದು ಹೇಳಿದರು.
ವಿಧಾನ ಪರಿಷತ್ ಶಾಸಕರಾದ ಅರವಿಂದಕುಮಾರ ಅರಳಿ ಅವರು ಮಾತನಾಡಿ, ಕೆಲವರು ಈ ಯೋಜನೆಯ ಬಗ್ಗೆ ಗೊಂದಲ ಸೃಷ್ಠಿಸುತ್ತಿದ್ದು ಇದರ ಬಗ್ಗೆ ಯಾರು ಕಿವಿ ಕೊಡದೇ ಗೃಹಲಕ್ಷ್ಮೀ ಯೋಜನೆಯಡಿ ಇನ್ನು ಹೆಚ್ಚಿನ ಮಹಿಳೆಯರು ನೋಂದಣಿ ಮಾಡಿಕೊಂಡು ಇದರ ಲಾಭ ಪಡೆಯಬೇಕು, ಮುಂದಿನ ದಿನಗಳಲ್ಲಿ ಮಹಿಳೆಯರು ಪ್ರಗತಿಯ ಜೊತೆಗೆ ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮದ ನೇರ ಪ್ರಸಾರವನ್ನು ಸಚಿವರು, ಶಾಸಕರು ಹಾಗೂ ಇತರರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!