ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ; ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ
ಬೀದರ್, ಆ. 14: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪರಿವರ್ತನ ಸಂಘದ ನೇತೃತ್ವದಲ್ಲಿ ಬೀದರ್ ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭಿಸಿರುವ ಉಪವಾಸ ಸತ್ಯಾಗ್ರಹ ಗುರುವಾರ ಎರಡನೇ ದಿನಕ್ಕೆ ಮುಂದುವರಿಯಿತು.
ಸಂಘದ ಮುಖಂಡರು ಆಗಸ್ಟ್ 6ರಂದು
ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಎರಡು ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು. ಅದರಂತೆ ಆಗಸ್ಟ್ 13ರಂದು ಆರಂಭವಾದ ಸತ್ಯಾಗ್ರಹವು ಬೇಡಿಕೆಗಳು ಈಡೇರುವವರೆಗೆ ನಿರಂತರವಾಗಿ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ವಿದ್ಯಾರ್ಥಿಗಳ ಪರೀಕ್ಷಾ ಹಾಗೂ ಪ್ರವೇಶ ಶುಲ್ಕವನ್ನು ಕಡಿತಗೊಳಿಸಬೇಕು. ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿರುವ ಸಿಬ್ಬಂದಿ ವ್ಯವಸ್ಥೆಯನ್ನು ತಕ್ಷಣ ರದ್ದುಪಡಿಸಬೇಕು. ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಕುರಿತು ಸಮಗ್ರ ತನಿಖೆ ನಡೆಸಬೇಕು. ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆಗಳ ಜೆರಾಕ್ಸ್ ಪ್ರತಿಗಳನ್ನು ನೀಡಿ ಪರೀಕ್ಷೆ ನಡೆಸಿರುವ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಉಪವಾಸ ಸತ್ಯಾಗ್ರಹದಲ್ಲಿ ಕರ್ನಾಟಕ ಪರಿವರ್ತನ ಸಂಘದ ಜಿಲ್ಲಾ ಅಧ್ಯಕ್ಷ ಪವನ ಮಿಠಾರೆ, ಸಲಹೆಗಾರ ಸೂರ್ಯಕಾಂತ ಸಾದುರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾವ ಮಾಲಗತ್ತಿ, ಉಪಾಧ್ಯಕ್ಷ ನಾಗಸೇನ ಗಾಯಕವಾಡ, ಮಹೇಶ ಭಾವಿದೊಡ್ಡಿ, ಸಂತೋಷ ಏಣಕುರೆ, ಸತೀಶ ಕಾಂಬ್ಳೆ, ಹರ್ಷಿತ ದಾಂಡೇಕರ್, ಜೈಪಾಲ್ ಕಾಣಜಿ, ಹರೀಶ ಖಂಡೆ, ಸಿದ್ಧಾರ್ಥ ಭಾವಿದೊಡ್ಡಿ, ದಿಲೀಪ, ಗೌತಮ್ ಮೀಸೆ, ಶಿವಸಾಗರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

